ಮಂಜಿನ ಹನಿಯಲ್ಲಿ ಒಮ್ಮೆ ಮಿಂದು ಹೋದುವರು

Wednesday, 27 November 2013

ಬಿಡುಗಣ್ಣ ನಕ್ಷತ್ರ!


ನಿತ್ಯವೂ ಸಿಕ್ಕುತ್ತಾಳೆ ಆ ಹುಡುಗಿ,
ಕೈಯ್ಯಲ್ಲಿ ಕೆಂಪು ಹೂವು,
ಕಣ್ಣಲ್ಲಿ ಕೋಟಿ ಕನಸು!
ಕೆಂಪು ಹೂವೆಂದರೆ
ಬಹುಶಃ ಗುಲಾಬಿಯಿರಬಹುದು,
ಆ ಹುಡುಗಿಗೆ ಹೇಳಿಕೊಟ್ಟವರಾರೋ
ಕೆಂಪಿಗೆ ಬಿಕರಿಯಾಗುವ
ತಾಕತ್ತಿದೆಯೆಂದು?
ನನಗೋ ಆ ಕೆಂಪು
ರಕ್ತದ ಕಲೆಗಳಂತೆ ಕಾಣುತ್ತದೆ!
ಆ ಹುಡುಗಿಯೂ ರಕ್ತ ಬಸಿದಿರಬಹುದೆ,
ಬೆವರ ಬದಲಾಗಿ?!

ಅಕ್ಷರಗಳ ಹಂಗಿಲ್ಲದೆ,
ಓರಗೆಯ ಮಕ್ಕಳೊಂದಿಗೆ
ಬೆರೆತು ಕುಣಿಯುವ ಆಸೆಗಳಿಲ್ಲದೆ
ಬಾಲ್ಯ ಕಳೆಯಲು
ಆ ಹುಡುಗಿ ತೀರ್ಮಾನಿಸಿರಬಹುದು!
ಏಕೆಂದರೆ ರಸ್ತೆ ದಾಟುವ
ಯೂನಿಫಾರ್ಮ್ ತೊಟ್ಟ
ಇತರ ಮಕ್ಕಳು ಅವಳೊಳಗೆ
ಒಂದು ತಿರಸ್ಕಾರದ ನಗೆ ಮತ್ತು
ಬಿಸಿಕಣ್ಣೀರಾಗುತ್ತಾರಷ್ಟೆ!
ಹಸಿದು ಕುದುರೆಯೇರಿದ ಬಾಲ್ಯಕ್ಕೆ,
ಕಿತ್ತ ಲಗಾಮೇ ಸಾಥಿ!

ಬಡವನ ಹಸಿವಿಗೆ ಸಾವಿರ ಬಾಯಿ!
ಇವಳು ಒಂದಿಲ್ಲೊಂದು
ಬಾಯಿಗೆ ಗಂಜಿ ಹುಯ್ಯುತ್ತಲೇ ಇರಬಹುದು,
ಅವಳಮ್ಮ ಕಾಯಿಲೆಯಿಂದ
ಮೂಲೆ ಹಿಡಿದಿರಬಹುದು,
ಅಪ್ಪ ಕುಡಿದು ಬಡಿಯಬಹುದು,
ತಮ್ಮ-ತಂಗಿಯರು
ಅರೆಹೊಟ್ಟೆ ಉಣ್ಣಬಹುದು,
ಇವಳು ಅವರಿಗೆಲ್ಲಾ ಗಂಜಿ ಹುಯ್ದು,
ತನ್ನ ಹೊಟ್ಟೆಗೆ ತಣ್ಣೀರು ಬಟ್ಟೆ ತಟ್ಟಬಹುದು!
ಮತ್ತೆ ಬೆಳಗೆದ್ದೊಡನೆ
ಅದೇ ರಸ್ತೆಗಳು, ಟ್ರಾಫಿಕ್ಕು ಸಿಗ್ನಲ್ಗಳು!

ಅವಳ ಬೆವರಿಗೆ
ಒಂದು ಅಂಕಿಯ ಮುಂದೆ ಸಾವಿರಾರು
ಸೊನ್ನೆಗಳ ಸುತ್ತಿ ಅದರ ಮುಂದೆ
ರೂಪಾಯಿ ಬರೆದಷ್ಟು ಬೆಲೆಯಿರಬಹುದು,
ಏಕೆಂದರೆ ಅದು ಕೆಳಗೆ ಬಿದ್ದ
ಜಾಗವೆಲ್ಲಾ ಸುಟ್ಟುಹೋಗುತ್ತದೆ!
ಒಮ್ಮೊಮ್ಮೆ ಅದರೊಳಗೆ ಬೆವರಷ್ಟೆ ಇರದೆ
ಬಿಸಿಯುಸಿರು, ಕಣ್ಣೀರು, ಹತಾಶೆ,
ಕಾಮುಕರ ಕಣ್ಣಳತೆ-ಕೈಯಳತೆಗಳೂ ಇರುತ್ತವೆ!
ಅಸುಗೂಸನ್ನಾದರೂ ಬಿಟ್ಟಾವೆಯೇ ಇವು?
ಎಂಬ ವಾಕರಿಕೆಯೂ ಇರಬಹುದು!

ಅವಳು ಪ್ರತಿ ಸಿಗ್ನಲ್ನಲ್ಲೂ,
ಒಬ್ಬರ ಬಳಿಯಲ್ಲದಿದ್ದರೆ,
ಮತ್ತೊಬ್ಬರ ಬಳಿ, ಅವರಲ್ಲವೆಂದರೆ
ಮತ್ತಿನ್ನೊಬ್ಬರ ಬಳಿ
ತೆರಳುವುದನ್ನು ನೋಡಿದ್ದೇನೆ!
ಯಾವುದೋ ಒಂದು ಕಾರು ತೂರಿದ
ಕಡೆಗೆ ಬಿಡುಗಣ್ಣು ಬಿಟ್ಟು
ನೋಡುವುದನ್ನು ನೋಡಿದ್ದೇನೆ!
ಸಾಕಷ್ಟು ವಿಫಲ ಯತ್ನಗಳ
ನಡುವೆಯೂ ನಗು ಮಾಸುವುದಿಲ್ಲ,
ಆ ಹೂವಿನದು, ಆ ಹುಡುಗಿಯದು!
ಆ ನಿರಂತರ ಭರವಸೆಗೆ ಏನನ್ನಬಹುದು?
ಯೋಚಿಸಿ ಕೂತ ನನಗೆ,
ಫ್ಯಾನ್ ನ ಗಾಳಿ ಕೂಡ ಬೆವರಿಸುತ್ತದೆ!

ಆ ಹುಡುಗಿ ನಾಳೆಯೂ ಸಿಗಬಹುದು,
ನಾಡಿದ್ದೂ ಸಿಗಬಹುದು,
ಆಚೆ ನಾಳೆಯೂ ಕೂಡ,
ಗುಲಾಬಿಗೂ, ಕೆಂಪಿಗೂ ಬಿಕರಿಯಾಗುವ
ತಾಕತ್ತಿರುವವರೆಗೂ
ಸಿಗುತ್ತಲೇ ಇರಬಹುದು!

- ಪ್ರಸಾದ್.ಡಿ.ವಿ.

ಚಿತ್ರಕೃಪೆ: ಅಂತರ್ಜಾಲ

ಇಲ್ಲಿ ಕೆಂಪು ಎಂಬುದು ’ಕನಸುಗಳು’ ಎಂಬರ್ಥದಲ್ಲಿ ಬಳಕೆಯಾಗಿದೆ.

Sunday, 24 November 2013

ನಾಮಕರಣಕ್ಕೊಂದು ಹೆಸರು!


ಪ್ರೀತಿಗೆ ಹೆಸರು
ಬರೆದಿದ್ದೇನೆ,
ಶ್ವಾಸ ತುಂಬಿ
ಉಫ್ಫೆಂದು
ಊದೇ ಗೆಳತಿ,
ಹೃದಯ ಬಡಿಯಬೇಕಿದೆ!

ಕಣ್ಣ ಕಣ್ಣೊಳಿಟ್ಟು
ನೋಡೇ ಗೆಳತಿ,
ಅಸ್ಪಷ್ಟ ಚಿತ್ರಗಳು
ಸುಸ್ಪಷ್ಟವಾಗಿ
ಮೂಡಿಕೊಳ್ಳಲಿ
ಕಣ್ಣುಕೂಡಿ ಕುಣಿಯಬೇಕಿದೆ!

ಒಮ್ಮೆ ಸ್ಪರ್ಷಿಸು
ಮಗಧೀರನನ್ನು
ಮೀರಿಸುವ
ಪ್ರೇಮಿಯಾಗಿ,
ಜನ್ಮಜನ್ಮಾಂತರಕೂ
ಕಾದು ಕೂರಬೇಕಿದೆ!

ನಿನ್ನ ಹೆಸರ
ಎದೆಯ ಮೇಲೆ
ಕೆತ್ತಿ ಹೋಗು,
ನನ್ನ ಪ್ರೀತಿಯ
ನಾಮಕರಣಕ್ಕೆ
ನಿನ್ನ ಮೊಹರು ಬೇಕಿದೆ!

- ಪ್ರಸಾದ್.ಡಿ.ವಿ.

’ಟೈಂ ಪಾಸ್ ಕವಿತೆ’  ಸುಮ್ನೆ ಓದಿಬಿಡಿ!
ಚಿತ್ರಕೃಪೆ: ಗೂಗಲ್ ಅಂತರ್ಜಾಲ

Sunday, 17 November 2013

ಟೀಕಿಸಲೆಂದೇ ಟೀಕಿಸುವವರಿಗೆ!


ಸಚಿನ್ ಗೆ ’ಭಾರತ ರತ್ನ’ ಕೊಟ್ಟದ್ದು ಅಗತ್ಯವಿಲ್ಲದಿರಬಹುದೇನೋ, ಏಕೆಂದರೆ ಕ್ರೀಡೆಗೆ ಸಂಬಂಧಿಸಿದ ಪರಮೊಚ್ಛ ಗೌರವ ’ಖೇಲ್ ರತ್ನ’ವಿದೆ ಎಂದು ಹೇಳುವವರ ಮಾತಿನ ತಳಹದಿಗಳೇ ನಂಗೆ ಅರ್ಥವಾಗ್ತಿಲ್ಲ. ’ಭಾರತ ರತ್ನ’ವನ್ನು ಕ್ರೀಡಾ ಕ್ಷೇತ್ರಕ್ಕೆ ವಿಸ್ತರಿಸಬಹುದೆಂದು ಕಳೆದ ವರ್ಷವೇ ತಿದ್ದುಪಡಿಯಾಗಿದೆ. ಆದ್ದರಿಂದ ಕ್ರೀಡೆಯನ್ನೂ ಒಳಗೊಂಡಂತೆ ದೇಶದ ನಾಗರೀಕನಿಗೆ ಕೊಡಬಹುದಾದ ಪರಮೋಚ್ಛ ಗೌರವ ’ಭಾರತ ರತ್ನ’ವಾಗುತ್ತದೆ!

ಇನ್ನು ’ಭಾರತ ರತ್ನ’ ಪ್ರಶಸ್ತಿಗೆ ಪರಿಗಣಿಸಲು ಸಚಿನ್’ನ ಬಾದ್ಯತೆಯ ಪ್ರಶ್ನೆ. ಸಚಿನ್ ತನಗೆ ’ಭಾರತ ರತ್ನ’ ಕೊಡಿ ಎಂದು ಸರ್ಕಾರದ ಹಿಂದೆ ಹಿಂದೆ ಓಡಿರಲಿಕ್ಕಿಲ್ಲ. ಅದು ಅವರ ಜಾಯಮಾನವೂ ಅಲ್ಲ. ಅಷ್ಟು ಸಾಕು ಆ ಅರ್ಹತೆ ಗಳಿಸಿಕೊಳ್ಳಲು! ಇನ್ನೂ ಆತ ’ಬಹುರಾಷ್ಟ್ರೀಯ ಕಂಪೆನಿ’ಗಳ ಜೇಬು ತುಂಬಿಸಿದ, ಹಣದಾಹಿ ಎಂಬ ಅಪವಾದ. ದುಡ್ಡು ಮಾಡಿದವರೆಲ್ಲ ಹಣದಾಹಿಗಳಲ್ಲ! ಆತ ತನ್ನ ಆಟದ ಹೆಮ್ಮಯೆಂಬಂತೆ ಮೆರೆದು, ವಿಶ್ವಕ್ಕೆ ಕ್ರಿಕೇಟ್ ನ ರಾಯಬಾರಿ ಎಂಬಂತೆ ಆಡಿ ತೋರಿಸಿದವ. ತನ್ನ ಕ್ರೀಡೆಯಲ್ಲಿ ಅತ್ಯುನ್ನತ ಶಿಖರವೇರಿದವ. ಇನ್ನೇನು ಸಾಧಿಸಲು ಉಳಿದಿತ್ತು ಕ್ರಿಕೇಟ್ ನಲ್ಲಿ ಅವನಿಗೆ? ಸೋ ಅವನು ಕ್ರಿಕೇಟ್ ನಲ್ಲಿ ಸಲ್ಲಿಸಿದ ಸೇವೆಯನ್ನು ’ಭಾರತ ರತ್ನ’ ಪ್ರಶಸ್ತಿಗೆ ಪರಿಗಣಿಸುವ ಅರ್ಹತೆ ಆತನಿಗಿತ್ತು.

ಇನ್ನೂ ’ಬಹುರಾಷ್ಟ್ರೀಯ ಕಂಪೆನಿ’ಗಳು ಎಂದು ತಂಪು ಪಾನೀಯದ ಪೆಪ್ಸಿ, ಕೋಲಾಗಳನ್ನಷ್ಟೇ ಕರೆದದ್ದು? ಬಹುರಾಷ್ಟ್ರೀಯ ಕಂಪೆನಿಗಳೆಂದರೆ ಬಹುರಾಷ್ಟ್ರಗಳಲ್ಲಿ ತನ್ನ ನೆಲೆಯನ್ನು ಹೊಂದಿರುವ ಎಲ್ಲವೂ ಬಹುರಾಷ್ಟ್ರೀಯ ಕಂಪೆನಿಗಳು, ಪೆಪ್ಸಿ-ಕೋಲಗಳಷ್ಟೆ ಅಲ್ಲ. ಆತ ಪೆಪ್ಸಿ-ಕೋಲಗಳಿಗಲ್ಲದೆ ಭಾರತೀಯ ಮೂಲದ ಅನೇಕ ಉತ್ಪನ್ನಗಳಿಗೂ ರಾಯಭಾರಿಯಾಗಿದ್ದ ಎನ್ನುವುದು ಎಲ್ಲರ ನೆನಪಿನಲ್ಲಿದ್ದರೆ ಸಾಕು! ಈ ತಂಪು ಪಾನೀಯಗಳ ಉದ್ಯಮ ಕಾರ್ಯ ನಿರ್ವಹಿಸುವುದಾದರೂ ಹೇಗೆ? ಪೆಪ್ಸಿ-ಕೋಲಗಳ ಬ್ರಾಂಡ್ ನೇಮ್ ಇಲ್ಲದಿದ್ದರೆ ಆ ತಂಪು ಪಾನೀಯಗಳು ಮಾರುಕಟ್ಟೆಯಲ್ಲಿ ಉಳಿಯಲೂ ಸಾಧ್ಯವಿಲ್ಲ! ಈ ಸಂದರ್ಭದಲ್ಲಿ ಟೋರಿನೋ ಮುಂತಾದ ಪೆಪ್ಸಿ ಬ್ರಾಂಡ್ ನೇಮ್ ಇಲ್ಲದ ತಂಪು ಪಾನೀಯಗಳಿಗೆ ಒದಗಿದ ದುಃಸ್ಥಿತಿಯನ್ನು ಎಲ್ಲರೂ ನೆನೆಯಬಹುದು. ಈ ಪರಿಸ್ಥಿತಿಗೆ ಕಾರಣ ಪೆಪ್ಸಿ-ಕೋಲ ಕಂಪೆನಿಗಳೇ ವಿನಃ ಸಚಿನ್ ಅಲ್ಲ ಎಂಬುದು ಎಲ್ಲರೂ ಒತ್ತತಕ್ಕಂಥದ್ದು.

ಸಚಿನ್ ಕ್ರಿಕೇಟ್ ನಲ್ಲಿ ಸಲ್ಲಿಸಿದ, ದೇಶಕ್ಕೆ ಸಲ್ಲಿಸಿದ ಸೇವೆಯನ್ನು ಗಮನಿಸುವುದಾದರೆ, ಆತ ೨೪ ವರ್ಷಗಳಿಂದ ತನ್ನ ಫಾರ್ಮ್ ನಲ್ಲಿ ಸ್ಥಿರತೆ ಕಾಯ್ದುಕೊಂಡು, ದೇಶದ ಹೆಸರನ್ನು ವಿರಾಜಮಾನವಾಗಿ ಹಾರಿಸಿದವ. ಸಚಿನ್ ಆಡಿದ್ದು ತನ್ನದೇ ಸ್ವಾಯತ್ತತೆ ಹೊಂದಿರುವ ಬಿ.ಸಿ.ಸಿ.ಐ ಎಂಬ ಸಂಸ್ಥೆಗೇ ಹೊರತು ಭಾರತಕ್ಕಾಗಿಯಲ್ಲ ಎನ್ನುವ ಮಾತು ಹಾಸ್ಯಾಸ್ಪದವೆನಿಸುತ್ತದೆ ನನಗೆ. ಸಚಿನ್ ನ ಫೇರ್’ವೆಲ್ ನಲ್ಲಿ ಆತ ಹೇಳಿಕೊಂಡದ್ದು "ಇಟ್ಸ್ ಮೈ ಡ್ರೀಂ ಟು ಪ್ಲೇ ಫಾರ್ ಇಂಡಿಯಾ ಅಂಡ್ ಐ ಹ್ಯಾವ್ ಲೀವ್ಡ್ ಇಟ್ ಫಾರ್ 24 ಇಯರ್ಸ್" ಮತ್ತು "ಇಟ್ಸ್ ಅವರ್ ಪ್ರಿವಿಲೇಜ್ ಅಂಡ್ ಪ್ರೈಡ್ ಟು ಪ್ಲೇ ಫಾರ್ ಇಂಡಿಯಾ". ಇಲ್ಲಿ ಇಂಡಿಯಾದ ಬದಲಾಗಿ ಆತ ಬಿ.ಸಿ.ಸಿ.ಐ ಎಂದು ಬಳಸಲಿಲ್ಲ! ತಮ್ಮದು ಸ್ವಾಯತ್ತತೆಯ ಸಂಸ್ಥೆ ಎಂದು ಘೋಷಿಸಿಕೊಂಡದ್ದು ಬಿ.ಸಿ.ಸಿ.ಐ ನ ದುರಾಸೆಯಿಂದಲೇ ಹೊರತು, ಸಚಿನ್ ನ ದುರಾಸೆಯಿಂದಲ್ಲ.

ಕ್ರಿಕೇಟ್ ಅನ್ನು ಒಲಂಪಿಕ್ ನಲ್ಲಿ ಸೇರಿಸಿದ್ದರೆ ಧ್ಯಾನ್ ಚಂದ್, ಮಿಲ್ಖಾ ಸಿಂಗ್ ಮತ್ತಿತರ ಮಹಾನ್ ಆಟಗಾರರು ಮಾಡಿರುವ ಸಾಧನೆಯಷ್ಟೇ ಸಚಿನ್ ಕೂಡ ಮಾಡಿರುತ್ತಿದ್ದ. ೨೪ ವರ್ಷ ಆಡಿದವನಿಗೆ ಅದು ಸಾಧ್ಯವಾಗುತ್ತಿರಲಿಲ್ಲ ಎಂಬುದು ತಳವಿಲ್ಲದ ವಾದ! ಆತ ತನ್ನ ಆಟದಿಂದಷ್ಟೇ ಅಲ್ಲದೆ, ತನ್ನ ವ್ಯಕ್ತಿತ್ವದಿಂದಲೂ ಎಷ್ಟೋ ಜನರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾನೆ ಎನ್ನುವುದು ಒಪ್ಪತಕ್ಕಂಥ ವಿಷಯ. ಅಂದ ಮಾತ್ರಕ್ಕೆ ಧ್ಯಾನ್ ಚಂದ್, ಮಿಲ್ಖಾ ಸಿಂಗರ ಸಾಧನೆಯನ್ನು ನಾನು ಅಲ್ಲೆಗೆಳೆಯುತ್ತಿಲ್ಲ, ಸಚಿನ್ ಗಿಂಥ ಮೊದಲು ಅವರಿಬ್ಬರಿಗೆ ಕೊಟ್ಟಿದ್ದರೂ ನನಗೆ ಸಂತೋಷವಾಗುತ್ತಿತ್ತು. ಆದರೆ ಸಚಿನ್ ಗೆ ಕೊಟ್ಟಿದ್ದರಲ್ಲಿ ಯಾವುದೇ ತಪ್ಪೂ ನನಗೆ ಕಾಣುವುದಿಲ್ಲ, ಕಾಂಗ್ರೇಸ್ ನವರ ಆಷಾಢಭೂತಿತನದ ರಾಜಕೀಯ ನಡೆಯೊಂದನ್ನು ಬಿಟ್ಟು! ಆ ರೀತಿ ನೋಡುತ್ತಾ ಹೋದರೆ ’ಭಾರತ ರತ್ನ' ಪ್ರಶಸ್ತಿಯ ’ತಮ್ಮ ಅಧಿಕಾರಾವಧಿಯ ಸಂದರ್ಭದಲ್ಲೇ ಪ್ರಶಸ್ತಿ ಪಡೆದ ಇಂದಿರಾ ಗಾಂಧಿ’ ಮತ್ತು ’ಸರ್ದಾರ್ ವಲ್ಲಭಬಾಯಿ ಪಟೇಲರೊಂದಿಗೆ ೧೯೯೧ ರಲ್ಲಿ ಪ್ರಶಸ್ತಿ ಪಡೆದ ರಾಜೀವ್ ಗಾಂಧಿ’ ಈ ಎರಡು ಸಂದರ್ಭಗಳು ಹಾಸ್ಯಾಸ್ಪದವೂ, ವಿಷಾದನೀಯವೂ ಅನ್ನಿಸುತ್ತದೆ!

- ಪ್ರಸಾದ್.ಡಿ.ವಿ.

Thursday, 14 November 2013

ಕೊಡಲಾಗದುಡುಗೊರೆ!


ನಿನಗೆಂದು ಕೊಡಲು
ಎತ್ತಿಟ್ಟ ಹೂವು ಬಾಡಿದೆ!
ಚೆನ್ನಿತ್ತು, ಚೆಲುವಿತ್ತು,
ಕೆಂಪಿತ್ತು, ಅರಳಿತ್ತು!
ನಿನ್ನ ಮುಡಿ ಸೇರದಿದ್ದರೂ,
ಉಡಿ ಸೇರದಿದ್ದರೂ,
ಕೈ ಸೇರಿದ್ದರೂ ಸಾಕಿತ್ತು,
ತಾನೂ ನಗುತಿತ್ತು!
ಬಾಡಿದ ಹೂವ ಅರಳಿಸಬೇಕು,
ನಗು ಬೇಕು ನನ್ನೆದೆಗೆ!
ಪ್ರೀತಿಯೇ ದಿಕ್ಕೆನಗೆ!

ನನ್ನ ಅಂಗೈ ಹಿಡಿದ ನಿನ್ನ
ಬೆರಳ ಗುರುತುಗಳ
ಮುದ್ದಿಸಿ ಎದೆಗಾನಿಸಿಕೊಂಡಿದ್ದೇನೆ,
ನೀನು ಕೇಳಬೇಕವುಗಳ
ಪಿಸುನುಡಿಯ,
ಹಾಲನ್ನು ಜೇನಿಗೆ ಬೆರೆಸಿ
ಗಟಗಟನೆ ಕುಡಿದಂತೆನಿಸುತ್ತದೆ!
ಸ್ವಲ್ಪವಾದರೂ ಕಹಿಯಿಲ್ಲ,
ಒಗರಿಲ್ಲ, ಹುಳಿಯಂತೂ ಮೊದಲಿಲ್ಲ!
ಸಿಹಿಯೊಂದೇ ಉಳಿದಿದೆ
ನಿನ್ನ ಸವಿಗಲ್ಲದಂತೆ!

ಹೇಳದೆ ಉಳಿದ ನೂರು ಮಾತಿವೆ
ಜೊತೆಯಾಗಿ, ಕೇಳದೆ
ಉಳಿದ ಹಲವಾರು ಪ್ರಶ್ನೆಗಳಿಗೆ!
ಉಸಿರು ಬಿಗಿಹಿಡಿದು
ನುಡಿದು ಬಿಡುವ ಆತುರವಿಲ್ಲ,
ಉತ್ತರ ಕೇಳಿ
ತಿಳಿದುಬಿಡುವ ಆವೇಗವಿಲ್ಲ!
ಉಳಿದದ್ದು ಉಳಿದುಬಿಡಲಿ,
ಸವಿನೆನಪ ಕುರುಹಾಗಿ!
ಋಣ ಉಳಿದರೆ ಉಳಿಯಲಿ,
ನಿನ್ನದೇ ಉಸಿರ ಸುಳಿಯಲಿ!

ಪಾಪಕ್ಕೆ ಪುಣ್ಯ ಜೋಡಿಸುವ
ಗೆಳತಿ ನೀನು!
ಕನಸು ಕಂಡು ಪಾಪ ಮಾಡುವೆ ನಾನು,
ಅವುಗಳಲ್ಲುಳಿದು
ಪಾಪ ತೊಳೆಯುವೆ ನೀನು!
ಆದರೆ ಕಮಲವದನೆ,
ಹಾಲುಗಲ್ಲದ ರಾಣಿ,
ಅತಿಲೋಕ ಸುಂದರಿ ಏನಲ್ಲ!
ನೀನು ಕಡಲೊಳಗಿನ ಮುತ್ತು,
ನಾನದನ್ನು ಕಾಯುವ ಕಪ್ಪೆಚಿಪ್ಪು!

ಇಷ್ಟೆಲ್ಲಾ ಭಾವಗಳ ನಿನಗಾಗೇ ಬೆಸೆದು,
ಕಾಗದದಿ ಪದಗಳ ಮರೆಯಲ್ಲಿ ಹೊಸೆದು,
ಹುಟ್ಟುಹಬ್ಬಕ್ಕೆ ಉಡುಗೊರೆಯ
ಕೊಡಬೇಕು ನಾನು!
ಬರೆಯುತ್ತಿದ್ದ ಲೇಖನಿಯ
ಮಸಿಯದು ಮುಗಿದಿದೆ,
ಇದ್ದ ಒಂದೇ ಹಾಳೆಯೂ ಗಾಳಿಗೆ ಹಾರಿದೆ!
ಮಸಿ ತುಂಬಬೇಕು, ಹಾಳೆಯೂ ಬೇಕು,
ಕೊಡಲಾಗದೇನೋ ಗೆಳತಿ ನಿನಗೆ,
ಕಾಯಬೇಡವೆ, ಬರಲಾಗದುಡುಗೊರೆಗೆ!

- ಪ್ರಸಾದ್.ಡಿ.ವಿ.

ಚಿತ್ರಕೃಪೆ: ಗೂಗಲ್ ಅಂತರ್ಜಾಲ

Friday, 8 November 2013

ಬೆಳಕು ಬೆತ್ತಲು!


ಬೆತ್ತಲಾಗಬೇಕು ನಾನು,
ಅಂಜಿಕೆಗಳುಳಿಯದಂತಹ
ಹೊಳಪ ಬೆತ್ತಲು!

ಬೆತ್ತಲೆಂದರೆ,
ಕಪ್ಪು ಕತ್ತಲೆಯ ಬೆತ್ತಲಲ್ಲ,
ಪಚ್ಚೆ ಬಿಳಿಯ ಬೆಳಕ ಬೆತ್ತಲು,
ತೆರೆದುಕೊಂಡಷ್ಟೂ
ಬರಿದಾಗುವಂತಹ ಒಡಲು,
ಮರು ಕೃಷಿಗೆ
ಫಲವತ್ತಾಗುವ ಬಯಲು!

ಬೆತ್ತಲೆಂದರೆ,
ಸಂಚಿಯಿಸಿಕೊಂಡ
ಕರ್ಮಗಳ ಹೊಳೆಯಲ್ಲಿ
ಹುಣಸೆ ತೊಳೆದು,
ಹುಳಿ ಇಂಗಿದ ಹುಣಸೆಯ ಜುಂಗಲ್ಲಿ
ಬೆಳಕ ತೊಳೆದು,
ಬೆತ್ತಲನ್ನು ಬೆಳಕಿಗೂ, ಬೆಳಕನ್ನು ಬೆತ್ತಲೆಗೂ
ಆರೋಪಿಸಿಬಿಡುವ ಕ್ರಿಯೆ, ಪ್ರಕ್ರಿಯೆ!

ಬೆತ್ತಲೆಂದರೆ,
ಪ್ರೇಮದೊಂದಿಗೆ ಕಾಮವು,
ಕಾಮದೊಂದಿಗೆ ಪ್ರೇಮವೂ ಜಿದ್ದಿಗೆ ಬಿದ್ದು,
ನಗ್ನತೆಯೊಳಗೆ ಪ್ರೇಮಕ್ಕೆ ಬೆವರ ಗುರುತು!
ಆವೇಶವಿಳಿದ ಮೇಲೂ
ಕಣ್ಣುಗಳು ಕೂಡಿಕೊಂಡ ತುಟಿಗಳ ಬೆಸುಗೆ,
ನನ್ನೊಳಗಿನ ನಗ್ನತೆಯನ್ನು ಒಪ್ಪಿಕೊಂಡು
ಅಪ್ಪಿಕೊಳ್ಳುವ ಪ್ರೇಯಸಿಯ ಸಲುಗೆ!

ಬೆತ್ತಲೆಂದರೆ,
ಅದು ಬೆಳಕು, ನಾನು ನನಗೂ,
ಇತರರಿಗೂ ಉತ್ತರಿಸುವಗತ್ಯವನ್ನೇ
ಉಳಿಸದ ಬೆಳ್ಳಿ ಬೆಳಕು!

- ಪ್ರಸಾದ್.ಡಿ.ವಿ.

ಚಿತ್ರಕೃಪೆ: ಗೂಗಲ್ ಅಂತರ್ಜಾಲ

Thursday, 24 October 2013

ಸಾವಿಗೂ ಪ್ರೀತಿ!



“ಪ್ರೀತಿ, ಮೈಥುನಕ್ಕೆ ಮಂಚ ಹತ್ತಿಸುವ ಕಾಮವಲ್ಲ ಕಣೆ, ಆದ ಮೇಲೆ ಮೆಲುಕು ಹಾಕುತ್ತ ಮೈತಡವಿ ಮರೆತುಬಿಡಲು. ಜೀವಂತಿಕೆ ಹೊತ್ತು ತರುವ ನೆನಪುಗಳು, ಕಾಪಿಟ್ಟ ಕನಸುಗಳು ಕಾಡುವಾಗ ಜೀವ ಹೋದಂತೆನಿಸುತ್ತದೆ. ನಿನಗೇನು, ಗೊತ್ತೂ ಗೊತ್ತಿಲ್ಲದಂತೆ, ಮರೆತು ಮರೆಯಾದಂತೆ ಹೋಗಿ ಬಿಟ್ಟೆ. ನಾನೇನು ಮಾಡಲಿ, ಸಾಯುವ ಮನಸ್ಸಿಲ್ಲ ಬದುಕುವ ಚೈತನ್ಯವಿಲ್ಲ! ದಿನವೂ ಸತ್ತು ಉಸಿರಾಡುತ್ತಿದ್ದೇನೆ…” ಎಂದು ಸ್ವಗತವೆಂಬಂತೆ ಹೇಳಿಕೊಂಡು ತನ್ನ ಶವ ಎತ್ತಿಕೊಂಡು ಬೆಡ್ ರೂಮ್ನಿಂದ ಲಿವಿಂಗ್ ರೂಮ್ ಗೆ ಬಂದನು ರಾಜೇಶ್.

ನಡೆಯುತ್ತಿದ್ದವನ ಹೆಜ್ಜೆಗಳು ತಪ್ಪಿ ಹೊರಳಿದಂತೆಯೂ, ತನ್ನ ಮೇಲೆಯೇ ಎರಗಿ ಬಿದ್ದಂತೆಯೂ ಭಾಸವಾಗಿ ಮುಂದೆಂಬುದು ಹಿಂದಾಗಿ, ಹಿಂದೆಂಬುದು ಮುಂದಾಗಿ ಚಲಿಸುವ ಭೀತಿ ಹುಟ್ಟಿಸುತ್ತಿದ್ದವು. ತಾನು ತಡವರಿಸಿ ಬಿದ್ದು ಮುಗ್ಗರಿಸಿದೆನೇ? ಎಂಬ ಭಯವೂ ಕಾಡುತ್ತಿತ್ತು. ಓಡುವ ಆಲೋಚನೆಗಳಿಗೆ ಕಡಿವಾಣ ಹಾಕುವ ಕಲೆ ಗೊತ್ತಿದ್ದರೆ ಚೆನ್ನಾಗಿತ್ತು ಅನಿಸುತ್ತಿತ್ತು. ಸರಿಯಿದ್ದ ಜೀವನದಲ್ಲಿ ತಾನೇ ಧಾಳಿಕೋರನಾಗಿ, ನೆನಪುಗಳನ್ನು ’ಛೂ’ ಬಿಡುತ್ತಿರುವುದು ಅತಿರೇಖವೇನೋ? ಜೀವಂತವಲ್ಲದ ಜೀವನವನ್ನವನು ಬದುಕುತ್ತಿರಬಹುದು. ಆದರೆ ತಾನು ಧಾಳಿಕೋರನೋ ಇಲ್ಲ ಧಾಳಿಯ ತರಗೆಲೆಯೋ ತಿಳಿಯುತ್ತಿಲ್ಲ! ತಲೆ ಚಿಟ್ಟೆನಿಸುತ್ತದೆ, ಮತ್ತೆ ಗಂಟಲು ಒಣಗುತ್ತದೆ. ಪಕ್ಕದಲ್ಲಿದ್ದ ಬಾಟಲ್ ನಲ್ಲಿನ ನೀರು ಗಟಗಟನೆ ಗಂಟಲೊಳಗಿಳಿಯುತ್ತದೆ. ಫ್ಯಾನ್ ಇದ್ದರೂ ಬೆವತ ಮುಖವನ್ನು ಒರೆಸಿಕೊಳ್ಳುತ್ತಾನೆ!

ಮನೆಯಲ್ಲಿ ಯಾರೂ ಇಲ್ಲದಿರುವುದು ಬೆಚ್ಚಿ ಬೀಳಿಸುತ್ತದೆ. ತಾನು ಬಾಲ್ಯವನ್ನೂ ಕಳೆದ ಮನೆ ತನ್ನನ್ನು ಹೀಗೆಂದೂ ಕಾಡಿದ್ದನ್ನು ನೆನಪಿಸಿಕೊಂಡರೂ ನೆನಪಿಲ್ಲ. ಕತ್ತಲೆಯೇ ಭಯವೋ, ಒಬ್ಬಂಟಿತನವೇ ಭಯವೋ ತೀರ್ಮಾನಕ್ಕೆ ಬರದ ಸ್ಥಿತಿ ತಲುಪಿದ್ದ ರಾಜೇಶ್. ಅಪ್ಪ-ಅಮ್ಮ ಈ ಹೊತ್ತಿನಲ್ಲೇ ಕಾಶೀ ಯಾತ್ರೆಗೆ ಹೋಗಬೇಕಿತ್ತೆ? ತಾನೂ ಜೊತೆಗೆ ಹೋಗಿದ್ದರೆ ಮನಸ್ಸಿಗಾದರೂ ನೆಮ್ಮದಿ ಸಿಗುತ್ತಿತ್ತೆ ಎಂದು ಯೋಚಿಸಿ ಸೋಲುತ್ತಿದ್ದ. ಈ ಚಿಲ್ಲರೆ ಯೋಚನೆಗಳು, ಆ ನೆನಪುಗಳು ಬಡಿದೆಬ್ಬಿಸುವ ಭೀಕರತೆಯ ಮುಂದೆ ಜಾಹಿರಾತುಗಳಂತಿರುತ್ತಿದ್ದವು. ಸರಿ ಇನ್ನೂ ಎಷ್ಟೊತ್ತು ಹೀಗೇ ಕೂತಿರೋದು, ತಲೆ ಸುತ್ತುತ್ತಿತ್ತು, ಗೋಡೆಯ ಮೇಲಿನ ಗಡಿಯಾರ ಈ ಸರಿ ರಾತ್ರಿಯ ಹೊತ್ತಲ್ಲಿ ’ಢಣ್ ಢಣ್ ಢಣ್’, ಹನ್ನೊಂದು ಸಲ ಬಡಿಯುತ್ತದೆ. ಗುಂಡಿಗೆಯೂ ಡವಡವಗುಟ್ಟುವ ಶಬ್ಧ ಮಾಡುತ್ತಾ ತಾನು ಬದುಕಿರುವುದನ್ನು ತೋರಿಸುತ್ತಿತ್ತು. ಕಣ್ಣು ಮತ್ತೆ ಮಂಜಾದಂತಾಗಿ ತಾನು ಊಟ ಮಾಡಿಲ್ಲದ ಅರಿವಾಯ್ತು ರಾಜೇಶ್ ಗೆ.

ಡೈನಿಂಗ್ ಟೇಬಲ್ ಮೇಲೆ ಅದಾಗಲೇ ಬಿಸಿ ಮಾಡಿಟ್ಟಿದ್ದ ಹುಳಿಸಾರು ಘಮ್ಮೆನ್ನುವ ಪರಿಮಳವನ್ನೇನೂ ಬೀರುತ್ತಿರಲಿಲ್ಲ. ಸರಿ ಹೇಗಾದರೂ ಊಟ ಮಾಡಿ, ಮಲಗಿಬಿಟ್ಟರೆ ಈ ಯೋಚನೆಗಳಿಂದ ಸ್ವಲ್ಪ ಮಟ್ಟಿಗೆ ಮುಕ್ತಿ ಸಿಕ್ಕಬಹುದೆಂದು ಯೋಚಿಸಿದವನು, ಒಂದು ತಟ್ಟೆ ತೆಗೆದು ಒಂದಷ್ಟು ಅನ್ನವನ್ನು ಸುರುವಿಕೊಂಡ. ಸಾರು ಹಾಕಿಕೊಂಡ. ನೆಂಚಿಕೊಳ್ಳಲು ಇದ್ದ ಖಾರ ಬೂಂದಿಯನ್ನು ಒಂದು ಪ್ಲೇಟ್ ಗೆ ಹಾಕಿಕೊಂಡು, ಒಂದೆರಡು ಕಾಳುಗಳನ್ನು ದವಡೆಗೆ ಒತ್ತರಿಸಿ ಜಗಿದ. ಊಟ ಮಾಡಬಹುದು ಎಂಬ ಸೂಚನೆ ಸಿಕ್ಕಿತು ಜಠರದಿಂದ! ಇತ್ತೀಚೆಗೆ ಯಾವ ಆಹಾರ ಪದಾರ್ಥವನ್ನೂ ಒಳಗೆ ಸೇರಿಸದ ಜಠರ ತನ್ನ ನಿಷೇಧಾರ್ಥಕ ಅಡ್ಡ ಗೋಣನ್ನು ಉದ್ಧುದ್ಧ ಕುಣಿಸಿದ್ದು ಸಮಾಧಾನವಾಗಿತ್ತು. ಒಂದೊಂದೇ ತುತ್ತುಗಳಂತೆ ಅನ್ನ ಹೊಟ್ಟೆಯೊಳಗಿಳಿದಂತೆ ಸಮಾಧಾನವೆನ್ನಿಸಲು ಶುರುವಾಯ್ತು. ತನ್ನ ಮನಸ್ಸು ಸರಿಯಿಲ್ಲವೆಂದು ಊಟವನ್ನೂ ತಪ್ಪಿಸುವುದು ಬುದ್ಧಿಗೇಡಿ ಕೆಲಸವೆಂದೂ, ಅದು ಮನಸ್ಸಿನ ದುಃಖವನ್ನು ದೇಹದ ಅಸಹಾಯಕತೆಯನ್ನಾಗಿ ಪರಿವರ್ತಿಸಿ ಬುದ್ಧಿ ನಿಷ್ಕ್ರಿಯವಾಗುವಂತೆ ಮಾಡುತ್ತದೆಂದೂ ಅರಿವಾಗುತ್ತಿತ್ತು. ಊಟ ಮುಗಿಸಿ, ಕೈ ತೊಳೆದು ತಟ್ಟೆಯನ್ನು ಸಿಂಕ್ ನೊಳಗಿಟ್ಟನು.

ಹೆಚ್ಚು ದಣಿದಿದ್ದರಿಂದಲೋ, ಮನಸ್ಸು ರಾಢಿಯಾಗಿದ್ದರಿಂದಲೋ ಅವನ ಮನಸ್ಸು ಬೆಡ್ ರೂಮನ್ನು ಹುಡುಕುತ್ತಿತ್ತು. ಹೆಜ್ಜೆಗಳು ತಾವಾಗಿಯೇ ಎಡ ಬದಿಯ ರೂಮಿನ ಹಾದಿ ಹುಡುಕಿ, ನಡೆದವು.

---------------------------------------------------------------------------------

“ನಿನ್ನ ಕೈಯೊಳಗೆ ನನ್ನಂಗೈ ಬೆಸೆದು ಕುಳಿತುಬಿಟ್ಟರೆ ಆಕಾಶದಲ್ಲಿ ಬೆಳದಿಂಗಳು ಕಾಣುತ್ತದೆ ರಾಜೀ…” ಖುಷಿ ನಿಧಾನವಾಗಿ ರಾಜೇಶ್’ನ ಭುಜದ ಮೇಲೊರಗುತ್ತಿದ್ದಳು. ಅವನೋ ಅವನೊಳಗೇ ಮಂಡಿಗೆ ತಿನ್ನುತ್ತಾ ಎದೆಯುಬ್ಬಿಸಿಕೊಳ್ಳುತ್ತಿದ್ದ!

“ಲೇ, ನೀವ್ ಹುಡ್ಗಿಯರು ಭಾರೀ ಛಾಲಾಕಿ… ಐಸ್ ಇಟ್ಟಂಗೆ, ನೈಸ್ ಮಾಡಿ ನಮ್ಮಂಥ ಒಳ್ಳೆ ಹುಡುಗ್ರ ತಲೆ ಕೆಡಿಸ್ಬಿಡ್ತೀರಿ… ಪಾಪ ನಾವು!” ಅವನು ಮೆಲ್ಲಗೆ ಕಣ್ಣು ಮಿಟುಗಿಸಿದ. ಅವನು ಹಾಗಂದಿದ್ದೇ ತಡ, ಅವಳು ತಡೆದರೂ ನಗುವೆಂಬುದು ಒದ್ದುಕೊಂಡು ಬಂತು. ಅವನೂ ಆ ನಗುವಿನಲ್ಲಿ ಒಂದಾದ.

“ಅಬ್ಬಾ ಮಾತು ನೋಡು.. ಪಾಪಿ, ನಾನ್ ಬಂದಿದ್ನಾ ಹಿಂದ್ ಹಿಂದೆ? ಪ್ರೀತಿ ಮಾಡ್ತೀನಿ ಅಂತ? ಈಗ ಅಯ್ಯೋ ಪಾಪ ನನ್ನ ಬಲೆ ಹಾಕಿ ಕೆಡವಿಕೊಂಡಳು ಅನ್ನೋ ಥರ ಮಾತಾಡ್ತಾನೆ…” ಅಂತ ಹುಸಿ ಕೋಪ ನಟಿಸಿದಳು ಖುಷಿ.

“ನಾನೇ ಬಂದಿದ್ದೆ ಅಂತಿಟ್ಕೋ, ಆದ್ರೆ ನನ್ನ ಮನಸ್ಸು ಕೆಡಿಸಿ ಕರೆಂಟ್ ಹೊಡೆಸಿದವಳು ನೀನೇ. ಹಾಗಂದಾಗ ಫ್ಲೋರೆಸೆಂಟ್ ಬಲ್ಬ್ ಥರ ನಗೋದು ಬೇರೆ…” ಎಂದು ಜೋರಾಗಿ ನಕ್ಕ. ಅವಳು ಅವನೊಳಗೆ, ಅವನು ಅವಳ ಕಣ್ಣೊಳಗೆ ಸಿಲುಕುತ್ತಿದ್ದರು. ಆ ತಕ್ಷಣಕ್ಕೆ ಅಪ್ಪ ಹೇಳಿದ್ದ ಯಾವುದೋ ಕೆಲಸದ ನೆನಪಾಗಿ… “ಖುಷಿ ನಾನು ಮತ್ತೆ ಸಿಗ್ತೀನಿ ಕಣೇ, ನೀನು ಆಟೋ ಹಿಡ್ಕೊಂಡು ಪಿ.ಜಿ. ಗೆ ಹೋಗು. ಬೇಡ, ನಾನೇ ಗೊತ್ತಿರೋ ಹುಡುಗನ ಆಟೋ ಹತ್ತಿಸ್ತೀನಿ ಬಾ…” ಎಂದು ಎಬ್ಬಿಸಲು ಪ್ರಯತ್ನಿಸಿದ.

ಅವಳು ಕೈಯ ಹಿಡಿತವನ್ನ ಬಿಗಿ ಮಾಡಿದಳು. “ಚಿನ್ನು ಹಠ ಮಾಡ್ಬೇಡ್ವೇ ಅಪ್ಪಾ ಬ್ಯಾಂಕ್ ಗೆ ಹೋಗ್ಬಾ ಅಂತ ಹತ್ ಸಲ ಹೇಳಿದ್ದಾರೆ. ನಾನು ಸಂಜೆ ಕಾಲ್ ಮಾಡ್ತೀನಿ. ಈಗ ಮೇಲೇಳು” ಅಂದ.

ಅವಳು, “ನಂಗದು ಬೇಕು” ಅಂದಳು. “ಅದು ಅಂದ್ರೆ ಏನು?” ಕೇಳಿದ ಅವನು. “ನನ್ನ ಯಾವಾಗ್ಲೂ ಹಿಡಿದುಕೊಂಡಿರೋಕೆ ಈ ಕೈ ಬೇಕು ನಂಗೆ” ಎಂದು ಅವಳ ಬೆರಳುಗಳಲ್ಲಿ ಬೆರಳಹುದುಗಿಸಿದ್ದ ಅವನ ಕೈಯನ್ನು ಎತ್ತಿ ತೋರಿಸಿದಳು.

“ಹೋ ಅದಾ.. ಅದು ಯಾವಾಗ್ಲೂ ನಿಂದೇ… ಈಗ ಎದ್ದು ನಡಿ” ಎಂದು ಎಬ್ಬಿಸಲು ಪ್ರಯತ್ನಿಸಿದ ರಾಜೇಶ್. ಅವಳು ತನ್ನ ಹಿಡಿತವನ್ನು ಮತ್ತಷ್ಟು ಬಿಗಿ ಮಾಡಿ, “ನಾನು ಹೇಳಿಲ್ವಾ, ಯಾವಾಗ್ಲೂ ಅಂದ್ರೆ ಯಾವಾಗ್ಲೂ” ಅಂದಳು ನಗುತ್ತಾ. “ಅಯ್ಯೋ ಯಾವಾಗ್ಲೂ ಕೈ ಬೇಕು ಅಂದ್ರೆ ಕಿತ್ ಕೊಡ್ಲಾ? ಆಟದ ವಸ್ತು ಕೇಳೋಥರ ಕೇಳ್ತೀಯಲ್ಲೇ?” ಎಂದು ಹುಸಿ ಕೋಪ ನಟಿಸಿದನವನು. ಅವಳು, “ಕಿತ್ ಕೊಡು, ಅದ್ರಲ್ಲೇನು?” ಎಂದು ನಗುವುದೇ? ಅವನಿಗೆ ಅವಳನ್ನು ಅಲ್ಲೇ ಅಪ್ಪಿ ಮುದ್ದಿಸಬೇಕು ಎನ್ನಿಸುತ್ತಿತ್ತು. ಅವಳು ಹೀಗೆ ಮುದ್ದು ಮುದ್ದಾಗಿ ಹಠ ಹಿಡಿದಾಗೆಲ್ಲಾ, ಎದೆಗಾತುಕೊಂಡು ಲಾಲಿ ಹಾಡುವಾ… ಎನಿಸುತ್ತದೆ ಅವನಿಗೆ!

ಅವಳು ಮೆಲುವಾಗಿ ಅವನ ಭುಜಕ್ಕೊರಗುತ್ತಿದ್ದಾಳೆ, ಅವನು ಅವಳ ಹಣೆಯನ್ನು ಮುತ್ತುತ್ತಿದ್ದ ತಲೆ ಕೂದಲನ್ನು ಸರಿಪಡಿಸಿ ತಲೆ ನೇವರಿಸುತ್ತಾನೆ. ಅವಳ ಕಣ್ಣುಗಳು ಹೊಳೆಯುತ್ತವೆ. ಸೂರ್ಯ ಸಂಜೆಯ ಗೋಧೂಳಿಗೋ, ಇವರಿಬ್ಬರ ಪ್ರೇಮದ ಸಿಗ್ಗಿಗೋ ಕೆಂಪಾಗುತ್ತಾನೆ!

***

“ಹಲೋ ರಾಜೀ, ನಾನು ಹೇಳೋದು ಕೇಳೋ… ನಾನು ಅಮರಪ್ರೇಮಿ, ಅವಳು ಪ್ರೇಮದೇವತೆ ಅಂತ ಫೂಲ್ ಥರ ಯೋಚಿಸ್ಬೇಡ. ನಂಗನ್ಸೋ ಪ್ರಕಾರ ಅವ್ಳು ನಿನ್ ನಿಷ್ಕಲ್ಮಷ ಪ್ರೀತಿಗೆ ಅರ್ಹಳಲ್ಲ!” ಸುನೀಲ್ ಏನನ್ನೋ ಹೇಳಲು ಪ್ರಯತ್ನಿಸುತ್ತಿದ್ದ.

“ಇಲ್ಲ ಸುನೀಲ್, ನೀನು ಹೇಳೋ ಥರದ ಹುಡ್ಗಿ ಅಲ್ಲ ಕಣೋ ಅವ್ಳು. ಯೂ ಹ್ಯಾವ್ ಮಿಸ್ಟೇಕನ್. ಅವ್ಳು ಎಲ್ಲಾ ಹುಡುಗ್ರು ಜೊತೆ ಸ್ನೇಹದಿಂದಿರ್ತಾಳೆ ಅಂದ ಮಾತ್ರಕ್ಕೆ ಅವ್ಳನ್ನ ಅನುಮಾನಿಸ್ಬೇಡ…” ರಾಜೇಶ್ ಏನನ್ನೋ ಹೇಳಿ ತನ್ನ ಪ್ರೀತಿಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡ್ತಿದ್ದ. ಅವನಿಗೇ ಅರಿವಾಗದಂತೆ ಅವನ ಹಣೆ ಗೆರೆಗೊಳ್ಳುತ್ತಿತ್ತು. ಒಂದೊಂದು ಗೆರೆಗಳೂ ಯೋಚನೆಯ ಅಲೆಗಳಲ್ಲಿ ಮುಳುಗೇಳುತ್ತಿದ್ದವು. ’ಇವ್ನು ಏನಂತ ತಿಳ್ಕೊಂಡಿದ್ದಾನೆ ನನ್ ಖುಷಿ ಬಗ್ಗೆ? ಅವ್ಳು ಪುಟಕಿಟ್ಟ ಚಿನ್ನ. ಸ್ವಲ್ಪ ತುಂಟತನವೇನೋ ಇದೆ, ಅದು ಅವಳಿಗೆ ಶೋಭೆಯೇ! ಆದರೆ ನನಗೆ ಎಂದಿಗೂ ಮೋಸ ಮಾಡಲಾರಳು. ಅದನ್ನು ತನ್ನ ಕನಸ್ಸಿನಲ್ಲಿಯೂ ಯೋಚಿಸಲಾರಳು! ಅಯ್ಯೋ ಸುನೀಲ ಯಾರು? ನನ್ನ ಗೆಳೆಯ, ನನ್ನ ಜಿಗ್ರಿ ದೋಸ್ತ್. ಅವ್ನ-ನನ್ನ ನಡುವೆ ಯಾವುದೇ ಮುಚ್ಚುಮರೆಗಳೇ ಇಲ್ಲ. ಅವನು ನನಗೆ ಕೆಟ್ಟದಾಗ್ಲಿ ಅಂತ ಯೋಚಿಸ್ತಾನ? ನನ್ನ ಪ್ರೀತಿಗೆ ಉಳಿ ಹಿಂಡೋದುಂಟಾ? ಅವ್ನು ಹೇಳ್ತಿರೋದ್ರಲ್ಲಿ. ಏನಾದ್ರೂ ಸತ್ಯ ಉಂಟಾ?’ ರಾಜೇಶ್’ನ ತಲೆ ಧಿಂ ಎನ್ನುತ್ತದೆ. ಅವನು ರಿಸೀವರ್ ಹಿಡಿದುಕೊಂಡು ಕುಸಿಯುತ್ತಾನೆ!

“ಅದ್ನೇ ಮಾಡ್ಬೇಡ ಅಂದಿದ್ದು ನಾನು. ಪ್ಲೀಸ್ ಕಣೋ ನನ್ನ ನಂಬು. ಇಲ್ದಿದ್ರೆ ಜೀವ್ನ ಹಾಳು ಮಾಡ್ಕೊತೀಯ…” ಸುನೀಲ್ ಆ ಕಡೆಯಿಂದ ಬಡಬಡಿಸುತ್ತಾನೆ.

“ಸರಿ ನೀ ಹೇಳೋದೆಲ್ಲ ನಿಜ ಅಂತ್ಲೇ ಇಟ್ಕೊಳ್ಳೋಣ. ನಿಂಗೆ ಈ ವಿಷ್ಯ ಹೇಗ್ ಗೊತ್ತಾಯ್ತು?” ಸಾವರಿಸಿಕೊಂಡ ರಾಜೇಶ್ ಕೇಳುತ್ತಾನೆ.

“ಅವಳ ಹೊಸ ಬಾಯ್ ಫ್ರೆಂಡ್ ಕೂಡ ನನ್ನ ಸ್ನೇಹಿತ. ಒಂದೆರಡು ಸಲ ನಿನ್ನ ಹುಡುಗಿಯೊಂದಿಗೆ ಅವನನ್ನ ನೋಡಿದ್ನಲ್ವಾ, ಸುಮ್ನೆ ಛೇಡ್ಸೋಕೆ ಅವ್ನಿಗೆ, ಏನೋ ಹುಡ್ಗಿ ಜೊತೆ ಫುಲ್ ರೊಮ್ಯಾನ್ಸಾ? ಅಂತ ಕೇಳ್ದೆ. ಅವ್ನೇ ಬಾಯಿ ಬಿಟ್ಟ ಕಣೋ. ಇದೆಲ್ಲ ನಿನ್ನ ವಿಷ ವರ್ತುಲದಲ್ಲಿ ಸಿಕ್ಸುತ್ತೆ ರಾಜೀ. ಪ್ಲೀಸ್ ಸ್ಟೇ ಔಟ್ ಆಫ್ ಇಟ್.” ಸುನೀಲ್ ರಾಜೇಶ್’ನ ಸಮಾಧಾನಪಡಿಸುವ ಪ್ರಯತ್ನ ಮಾಡುತ್ತಿದ್ದ. ’ಸುನೀಲ ಹೇಳುವುದರಲ್ಲಿ ನಿಜವಿದ್ದರೂ ಇರಬಹುದು. ಅವನು ಪಿ.ಜಿ. ಓದುತ್ತಿರುವ ಕಾಲೇಜ್ ನಲ್ಲೇ ಖುಷಿ ಕೂಡ ಪಿ.ಜಿ. ಮಾಡ್ತಿದ್ದಾಳೆ. ಎಷ್ಟೋ ಬಾರಿ ಖುಷಿಗೆ ಸರ್ಪ್ರೈಸ್ ಗಿಫ್ಟ್ ಗಳನ್ನ ಕಳಿಸಲು ಸಹಾಯ ಮಾಡ್ತಿದ್ದವನೇ ಅವ್ನು. ನಾನು ಅವರಿಬ್ಬರಿಗೆ ಒಮ್ಮೆ ಮುಖತಃ ಭೇಟಿ ಮಾಡಿಸಿದ್ದೂ ನೆನಪು. ಅಯ್ಯೋದೇವ್ರೆ ಇವ್ನು ಹೇಳ್ತಿರೋದೆಲ್ಲಾ ಸುಳ್ಳಾಗ್ಲಿ!’ ರಾಜೇಶ್ ಅಧೀರನಾಗುತ್ತಿದ್ದಾನೆ.

ತನ್ನೊಳಗೇ ತತ್ತರಿಸುತ್ತಿದ್ದ ಅವನು. “ನೀನು ಏನ್ ಹೇಳಿದ್ರೂ ನಂಬಲ್ಲ ನಾನು. ನನ್ನ ಪಾಡಿಗೆ ನನ್ನ ಬಿಟ್ಬಿಡು. ನನ್ನ ಪ್ರೀತಿನ ಹೇಗೆ ಉಳಿಸ್ಕೊಳ್ಬೇಕು, ಹೇಗೆ ಕಾಪಾಡ್ಕೊಳ್ಬೇಕು ಅಂತ ನಂಗೆ ಗೊತ್ತಿದೆ…” ಎಂದ ರಾಜೇಶ್ ನ ತಲೆಯಲ್ಲಿ ನೂರಾರು ಯೋಚನೆಗಳು ಓಡಾಡುತ್ತಿದ್ದವು.

“ಸರಿ ನನ್ನ ನಂಬ್ದಿದ್ರೆ ಬೇಡ, ನಂಬಬೇಡ! ಆದ್ರೆ ಇವತ್ತು ಸಂಜೆ ಕಾರಂಜಿ ಕೆರೆಗೆ ಹೋಗು. ಅಲ್ಲಿ ಅವರಿಬ್ರೂ ಭೇಟಿ ಮಾಡ್ತಿದ್ದಾರೆ ಅನ್ನೋ ವಿಷ್ಯಕ್ಕೆ ನಾನು ಕಿವಿಯಾದೆ. ಅದೂ ಅಚಾನಕ್ ಆಗಿ ಕಿವಿಗೆ ಬಿದ್ದದ್ದು! ಆಮೇಲೆ ಏನ್ ಮಾಡ್ಬೇಕು ಅಂತ ನೀನೇ ಯೋಚ್ನೆ ಮಾಡ್ತೀಯಂತೆ!” ಸುನೀಲ್ ತನ್ನ ಬಳಿ ಇದ್ದ ಎಲ್ಲಾ ವಿಷಯಗಳನ್ನು ಒದರಿ ರಿಸೀವರ್ ಇಟ್ಟುಬಿಟ್ಟ.

ಖುಷಿ ಇತ್ತೀಚೆಗೆ ನನ್ನೊಂದಿಗೆ ಮಾತು ಕಡಿಮೆ ಮಾಡಿದ್ದಾಳೆ. ಕೇಳಿದ್ರೆ ಕಾಲೇಜು, ಸ್ಟಡೀಸ್ ಅಂತ ನೆವ ಹೇಳ್ತಾಳೆ. ನಾನೋ ಈ ಕಂಪೆನಿ ಕೆಲ್ಸಗಳ ಮಧ್ಯೆ ಸಿಕ್ಕೊಂಡಿದ್ದೀನಿ. ನಾನು ಭೇಟಿಯಾಗ್ಬೇಕು ಅಂದಾಗ ಓದು ಅಂತ ಕಾರಣ ಹೇಳ್ತಾಳೆ, ತಾನೇ ಭೇಟಿ ಮಾಡು ಅಂತಾನೂ ಕೇಳ್ತಿಲ್ಲ. ಇವ್ಳು ಹಿಂದೆ ಹೀಗಿರ್ಲಿಲ್ಲ. ಈ ಹುಡ್ಗಿಯರೆಲ್ಲಾ ಹೀಗೇನಾ? ಗೆಳೆಯ ಅಂತನ್ನಿಸ್ಕೊಂಡ ಹುಡ್ಗ ಕಣ್ಣೆದುರಿಗಿಲ್ಲ ಅಂದ ತಕ್ಷಣ ಅವನ ಮೇಲಿನ ಎಲ್ಲಾ ಭಾವನೆಗಳು ಕಣ್ಣೆದುರಿಗಿರುವ ಮತ್ತೊಬ್ಬನ ವಶವಾಗಿಬಿಡ್ತವಾ? ಅವಳು ಆ ಇನ್ನೊಬ್ಬನ ತೆಕ್ಕೆಯೊಳಗೆ ಜಾರಿ ಬಿಡ್ತಾಳಾ? ಬೇರೆ ಹುಡ್ಗಿಯರು ಹೋಗ್ಲಿ, ನನ್ನ ಖುಷಿ ಕೂಡ ಹೀಗೇನಾ? ರಾಜೇಶನ ಯೋಚನೆಗಳು ಎಲ್ಲಾ ಎಲ್ಲೆಗಳನ್ನೂ ಮೀರುತ್ತಿದ್ದವು. ’ಸರಿ, ಅವ್ನೇನಂದ ಕಾರಂಜಿ ಕೆರೆ ಅಲ್ವಾ? ಇವತ್ತು ಸಂಜೆ ಹೋಗಿ ನೋಡೇ ಬಿಡೋಣ!’ ರಾಜೇಶ್ ತನ್ನೊಳಗೇ ಒಂದು ನಿರ್ಧಾರಕ್ಕೆ ಬಂದ.

***

ಸಂಜೆಯ ತಂಪು ಗಾಳಿ ಹಿತವಾಗಿತ್ತು. ರಾಜೇಶ್ ಒಂದು ಕಡೆಯಿಂದ ಕಾರಂಜಿ ಕೆರೆ ಉದ್ಯಾನವನ್ನು ಜಾಲಾಡಲು ಪ್ರಾರಂಭಿಸಿದ್ದನು. ಒಂದು ಕಡೆಯ ಎಲ್ಲಾ ಬೆಂಚುಗಳನ್ನೂ ಪರಿಶೀಲಿಸಿದ ನಂತರ ಇನ್ನೊಂದು ದಿಕ್ಕಿನೆಡೆಗೆ ಹೆಜ್ಜೆಗಳು ನಡೆದು ಹೋಗುತ್ತಿದ್ದವು. ಅವರಿಬ್ಬರನ್ನೂ ಕಂಡ ನಂತರ ಅದೇ ಹೆಜ್ಜೆಗಳು ಅದುರಿದವು, ತರತರಗುಟ್ಟಿದವು. ಹೊಂಬಿಸಿಲಲ್ಲೂ ಮೈ ಬೆವರುತ್ತಿತ್ತು.

ರಾಜೇಶ್ ತನ್ನೊಳಗೇ, ’ರಾಜೇಶ್ ಕಾಮ್ ಡೌನ್, ರೆಡಿ ಟು ಫೇಸ್ ದ ರಿಯಾಲಿಟಿ!’ ಎಂದು ಧೈರ್ಯ ಹೇಳಿಕೊಳ್ಳುತ್ತಿದ್ದನು. ಸ್ವಲ್ಪ ಸಮಯದವರೆಗೂ ಅವರಿಬ್ಬರ ಮಾತುಗಳನ್ನಾಲಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದ. ಕಡೆಗೆ ಇದೆಲ್ಲದಕ್ಕೂ ಇತಿಶ್ರೀ ಹಾಡುವ ಗಟ್ಟಿ ಮನಸ್ಸು ಮಾಡಿ ಅವರಿಬ್ಬರ ಮುಂದೆ ಪ್ರತ್ಯಕ್ಷನಾದನು.

ಅವನನ್ನು ಕಾಣುತ್ತಿದ್ದಂತೆ ಸ್ವಲ್ಪ ವಿಚಲಿತಳಾದಂತೆ ಕಂಡು ಬಂದ ಖುಷಿ, ಬಾಯಿ ತೆರೆಯಲಾಗದೆ ’ಬೆಬ್ಬೆಬ್ಬೆ…’ಗುಟ್ಟುತ್ತಿದ್ದಳು. ಸ್ವಲ್ಪ ಸಮಯದ ನಂತರ ಸಾವರಿಸಿಕೊಂಡು, “ಹೇ ರಾಜೇಶ್ ನೀನೇನಿಲ್ಲಿ. ನಿನ್ನ ನೋಡ್ತಿರೋದು ಆಶ್ಚರ್ಯ ಆಗ್ತಿದೆ!” ಎಂದಳು.

“ಹೌದು ವಾಸ್ತವಗಳನ್ನು ಎದುರಿಸುವಾಗ ಎಲ್ರಿಗೂ ಹಾಗಾಗಬಹುದು!” ಎಂದನು ರಾಜೇಶ್. ಅವಳ ಮುಖ ಕಪ್ಪಿಟ್ಟಿತು.

ಆದರೂ ಸಾವರಿಸಿಕೊಂಡು, ಪಕ್ಕದಲ್ಲಿದ್ದ ಹುಡುಗನಿಗೆ, “ಹೇ ಜ಼ರೀನ್, ಇವ್ನು ನನ್ನ ಇಂಜಿನಿಯರಿಂಗ್ ಕಾಲೇಜ್ ಮೇಟ್ ಮತ್ತು ಗೆಳೆಯ ರಾಜೇಶ್” ಎಂದಳು. ನಂತರ ರಾಜೇಶ್ ನೆಡೆಗೆ ತಿರುಗಿ, “ರಾಜೇಶ್, ಯೂ ಕ್ನೋ, ಹೀ ಈಸ್ ಜ಼ರೀನ್. ನನ್ನ ಬಾಯ್ ಫ್ರೆಂಡ್” ಎಂದು ಪರಿಚಯಿಸಿದಳು.

ಜ಼ರೀನ್ ಸಹಜವೆಂಬಂತೆ ತನ್ನ ಕೈ ಮುಂದೆ ಚಾಚಿದ. ಅವನ ಕೈ ಕುಲುಕಿದ ರಾಜೇಶ್ ಖುಷಿಯೆಡೆಗೆ ತಿರುಗಿ, “ಇಟ್ಸ್ ಗುಡ್ ಟು ಕ್ನೋ, ಲಾಟ್ ಆಫ್ ಇನ್ಫರ್ಮಾಷನ್ಸ್ ಇನ್ ಅ ಡೇ!” ಅಂದನು. ತಾನೇ ಮುಂದುವರೆಸುತ್ತಾ… ”ಖುಷಿ ಅಕ್ಟೋಬರ್ ೧೦ಕ್ಕೆ ನನ್ನ ಭೇಟಿ ಮಾಡು. ನಾನು ನಿಂಗೆ ಸೆಂಡ್ ಆಫ್ ಕೊಡ್ಬೇಕು!” ಎಂದನು. ಅವಳು ದಿಗ್ಭ್ರಾಂತಳಾಗಿ ನಿಂತಿದ್ದಳು. “ನನಗೆ ಪ್ರೀತಿಯೆಂದರೇನೆಂದು ತಿಳಿಸಿ ದೊಡ್ಡ ಉಪಕಾರ ಮಾಡಿದ ನಿನಗೆ ನಾನು ಅಷ್ಟೂ ಮಾಡಿಲ್ಲ ಅಂದ್ರೆ ತಪ್ಪಾಗುತ್ತೆ!” ಎಂದ ರಾಜೇಶನ ಹೆಜ್ಜೆಗಳು ಬಿರುಸು ಪಡೆದುಕೊಂಡವು.

***

ಅಸಾಧಾರಣವಾಗಿ ಬೆವರುತ್ತಿದ್ದ ರಾಜೇಶನಿಗೆ ಗಕ್ಕನೆ ಎಚ್ಚರವಾಯ್ತು. ತಾನು ಕಂಡದ್ದು ಕನಸೋ, ನಿಜವೋ ತಿಳಿಯದೆ ತೊಳಲಾಡಲಾರಂಭಿಸಿದ. ಗಡಿಯಾರ ಮತ್ತೆ, ’ಢಣ್ ಢಣ್’ ಎಂದು ಎರಡು ಸಲ ಬಡಿದು ಸುಮ್ಮನಾಯ್ತು. ತಡೆಯಲಸಾಧ್ಯವಾದ ದಾಹವನ್ನು ತಣಿಸಿಕೊಳ್ಳಲು ಅವನು ನೀರಿಟ್ಟಿದ್ದ ಲೋಟ ಹುಡುಕಲೇಬೇಕಾಯ್ತು. ಗಟಗಟನೆ ನೀರು ಗಂಟಲೊಳಗಿಳಿಸಿಕೊಂಡವನು, ಸಮಾಧಾನದ ನಿಟ್ಟುಸಿರು ಬಿಟ್ಟನು. ಎದ್ದು ತನ್ನ ಮಂಚದ ಪಕ್ಕದಲ್ಲಿದ್ದ ಕಿಟಕಿಗಳನ್ನು ತೆರೆದು ಸುಯ್ಯನೆ ಬೀಸುತ್ತಿದ್ದ ತಂಗಾಳಿಗೆ ಮೈಯೊಡ್ಡಿಕೊಂಡನು. ಇನ್ನೂ ನಿದ್ದೆ ಕಳೆದಿಲ್ಲ ಎಂದೆನಿಸಲು ಶುರುವಾಗುತ್ತದೆ, ಸುಮ್ಮನೆ ಯೋಚನೆ ಮಾಡುತ್ತ ಪಕ್ಕದಲ್ಲಿದ್ದ ಕುರ್ಚಿಯ ಮೇಲೆ ಕೂರುತ್ತಾನೆ. ಕುರ್ಚಿಯನ್ನು ಹಿಂದಿನಿಂದ ಮುಂದಕ್ಕೂ, ಮುಂದಿನಿಂದ ಹಿಂದಕ್ಕೂ ಜೋಕಾಲಿ ಜೀಕಿಸುತ್ತಾನೆ. ಈಗವನಿಗೆ ಹಾಯೆನಿಸುತ್ತದೆ!

---------------------------------------------------------------------------------

“ಹಲೋ, ರಾಜೇಶ್ಅವರ ಮಾತಾಡ್ತಿರೋದು?” ಎಂದು ಹೆಣ್ಣು ದನಿಯೊಂದು ರಾಜೇಶ್’ನ ಮೊಬೈಲೊಳಗಿಂದ ಕೇಳಿ ಬರುತ್ತದೆ. ’ಐಸ್ ಕ್ರೀಂ ಕಾರ್ನರ್’ ನ ಒಂದು ಮೂಲೆಯಲ್ಲಿ ಕೂತಿದ್ದ ಅವನು ಆ ಕಡೆ, ಈ ಕಡೆ ನೋಡಿ… “ಹೌದು, ಹೇಳಿ” ಎಂದನು.

“ನಾನು ಖುಷಿ ತಂಗಿ ಅನೀತ ಮಾತಾಡ್ತಿರೋದು” ಎಂದಿತು ಆ ಕಡೆಯ ಧ್ವನಿ. ರಾಜೇಶ್’ನಿಗೆ ಅನೀತಾಳ ನೆನಪಾಯ್ತು. ಆ ಥರ ನೋಡೋದಾದ್ರೆ ಅವನು ಖುಷಿ ಮನೆಯವ್ರನ್ನ ಒಂದೆರಡು ಸಲ ಭೇಟಿ ಮಾಡಿಯೂ ಇದ್ದ! ಆ ಕುಟುಂಬದಲ್ಲಿ ತಾನೂ ಕಳೆದುಹೋಗಬೇಕೆಂದು ಬಯಸಿದ್ದ.

“ಹೇಳು ಅನೀತಾ, ಏನ್ ಸಮಾಚಾರ?” ಅವನು ಕರೆ ಮಾಡಿದ ಕಾರಣ ವಿಚಾರಿಸಿಕೊಳ್ಳುತ್ತಿದ್ದ.

“ಅಕ್ಕನಿಗೆ ಆಕ್ಸಿಡೆಂಟ್ ಆಗಿದೆ. ಐ.ಸಿ.ಯೂ ನಲ್ಲಿದ್ದಾಳೆ. ನಿಮ್ಮ ಹೆಸರನ್ನು ಪದೇ ಪದೇ ಕನವರಿಸುತ್ತಿದ್ದಳು ಅದಕ್ಕೆ ನಿಮಗೆ ಫೋನ್ ಮಾಡಿದ್ದು” ಎಂದಿತು ಆ ಕಡೆಯ ಧ್ವನಿ.

ರಾಜೇಶ್ ಆಗಷ್ಟೆ ಕೇಳಿದ ವಿಷಯವನ್ನು ಅರಗಿಸಿಕೊಳ್ಳಲಾಗದೆ ತತ್ತರಿಸುತ್ತಿದ್ದ. ಅವ್ಳು ಅಷ್ಟು ವೇಗವಾಗಿ ಗಾಡಿ ಓಡ್ಸೋಳಲ್ಲ ಆದ್ರೂ ಯಾಕ್ ಹೀಗಾಯ್ತು. ಕೈಗಳು ನಡುಗಲು ಪ್ರಾರಂಭಿಸುತ್ತವೆ. ಸ್ವಲ್ಪ ಸಾವರಿಸಿಕೊಂಡು… “ಯಾವ ಆಸ್ಪತ್ರೆಲಿದ್ದಾಳೆ?” ಅವನಿಗರಿವಿಲ್ಲದಂತೆ ಹೊರಟಿತ್ತು ಮಾತು.

“ಅಪೋಲೋ ಆಸ್ಪತ್ರೆ. ಅಪ್ಪ-ಅಮ್ಮ ಎಲ್ರೂ ಬಂದಿದ್ದಾರೆ. ಅಕ್ಕ ಪದೇ ಪದೇ ನಿಮ್ಮ ಹೆಸ್ರನ್ನ ಕನವರಿಸ್ತಿದ್ದಾಳೆ. ಒಂದ್ಸಲ ಬಂದ್ ಹೋಗೋಕಾಗುತ್ತಾ?” ದೈನ್ಯವಾಗಿ ಕೇಳಿದಳು ಅನೀತ. “ಇನ್ನು ಹತ್ತು ನಿಮಿಷದಲ್ಲಿ ಅಲ್ಲಿರ್ತೀನಿ” ಮೊಬೈಲ್ ಅನ್ನು ಜೇಬಿಗಿಳಿಸಿದವನ ಬೈಕ್ ವೇಗವಾಗಿ ಓಡಲಾರಂಬಿಸುತ್ತದೆ.

***

ಖುಷಿ ಐ.ಸಿ.ಯೂ ನಲ್ಲಿರೋದು ನೋಡಿ ರಾಜೇಶನ ಕಣ್ಣುಗಳು ಹನಿಗೂಡುತ್ತಿದ್ದವು. ಅವನು ಖುಷಿಯ ಪರಿಸ್ಥಿತಿ ಹೇಗಿದೆ ಎಂದು ತಿಳಿಯುವ ಧಾವಂತ ತೋರಿಸುತ್ತಾನೆ. ಅವಳನ್ನು ಟ್ರೀಟ್ ಮಾಡ್ತಿರೋ ಡಾಕ್ಟರ್ ಗಾಗಿ ಅಲ್ಲಲ್ಲಿ ತಡಕಾಡುತ್ತಾನೆ. ಅವನಿಗೆ ಏನು ಮಾಡಬೇಕೆಂದೇ ತೋಚದಾಗುತ್ತದೆ.

ಮುಂದೆ ನಡೆದು ಹೋಗುವಾಗ, ಯಾರೋ ಖಾಕಿ ತೊಟ್ಟ ಒಂದಷ್ಟು ಜನ ಮಧ್ಯ ವಯಸ್ಕರೊಬ್ಬರೊಂದಿಗೆ ಮಾತನಾಡುತ್ತಿರುತ್ತಾರೆ. “ನಿಮ್ಮ ಮಗಳೇನಾದ್ರು ಹೊಸದಾಗಿ ಡ್ರೈವಿಂಗ್ ಕಲಿಯುತ್ತಿದ್ದರಾ? ಯಾಕಂದ್ರೆ ಇದು ಡೆಲಿಬರೇಟ್ ಆಗಿ ಆಗಿರುವಂತಹ ಆಕ್ಸಿಡೆಂಟ್. ಒನ್ ವೇ ಟ್ರಾಫಿಕ್ ನಲ್ಲಿ, ಅದೂ ಪೀಕ್ ಅವರ್ಸ ಅಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದಿದ್ದಾರೆ. ಅಲ್ಲಾರೀ ಕಲ್ತಿರೋ ಜನಾನೇ ಟ್ರಾಫಿಕ್ ರೂಲ್ಸ್ ನ ಗಾಳಿಗೆ ತೂರಿದ್ರೆ ಕಲಿತಿಲ್ಲದೆ ಜನಕ್ಕೆ ನಾವೇನ್ ಹೇಳೋದು?.” ಆ ಖಾಕಿ ಆಸಾಮಿ ವಿಚಾರಿಸುತ್ತಲೇ ಇದ್ದ. ರಾಜೇಶ್ ಸುಸ್ತಾಗಿ ಬಳಲಿದವನಂತೆ ಕಾಣುತ್ತಿದ್ದ ಆದರೂ ಡಾಕ್ಟರ್ ನ ಕೊಠಡಿ ಹುಡುಕುತ್ತಲೇ ಇದ್ದ.

ಡಾಕ್ಟರ್ ಬಳಿ ನಿಂತವನೇ, “ಡಾಕ್ಟರ್ ಏನಿದೆಲ್ಲಾ? ಖುಷಿಗೇನಾಗಿದೆ? ಪ್ಲೀಸ್ ಅವ್ಳಿಗೇನೂ ಆಗಿಲ್ಲ. ಬದುಕ್ತಾಳೆ ಅಂತ ಹೇಳಿ ಪ್ಲೀಸ್… ನಿಮ್ ದಮ್ಮಯ್ಯ ಅಂತೀನಿ” ರಾಜೇಶ್ ನ ಕಣ್ಣೀರು ಧಾರಕಾರವಾಗಿತ್ತು.

“ನಮ್ ಕೈಯ್ಯಲ್ಲಾಗೋ ಎಲ್ಲಾ ಪ್ರಯತ್ನಾನೂ ಮಾಡ್ತೀವಿ ಮಿಸ್ಟರ್. ಇನ್ನುಳಿದದ್ದು ದೇವ್ರಿಛ್ಛೆ.” ಡಾಕ್ಟರ್ ಎಲ್ಲವನ್ನೂ ದೇವರ ಮೇಲೆ ಹಾಕಿ ನಿರಾಳರಾದರು.

ಪಕ್ಕದಲ್ಲಿದ್ದ ನರ್ಸ್ ಒಂದು, ಇನ್ನೊಬ್ಬರೊಂದಿಗೆ, “ಆ ಹುಡ್ಗಿ ಹಣೆಬರಹ ನೋಡಿ, ಮೊದ್ಲೇ ಕ್ಯಾನ್ಸರ್ ಬೇರೆ ಇತ್ತು. ಅದು ಸಾಲ್ದು ಅಂತ ಈಗ ಆಕ್ಸಿಡೆಂಟ್ ಬೇರೆ ಆಗಿದೆ. ಅವಳ ಹಣೆಯಲ್ಲಿ ಇನ್ನೆಷ್ಟ್ ದಿನ ಅಂತ ಬರ್ದಿದ್ದಾನೋ ಬ್ರಹ್ಮ! ಆದ್ರೂ ಎಂತಹ ಉತ್ಸಾಹದ ಚಿಲುಮೆ ಅವ್ಳು. ಆ ಸಾವಿಗೂ ಅವ್ಳನ್ನ ಕಂಡು ಅಸೂಯೆಯಾಗಿರ್ಬೇಕು!” ಎಂದು ಹೇಳುತ್ತಿದ್ದರು.

ರಾಜೇಶ್ ಗರಬಡಿದವನಂತೆ ನಿಂತಿದ್ದ. ಯಾಂತ್ರಿಕವಾಗಿ ಐ.ಸಿ.ಯೂ ನ ಕಡೆ ತಿರುಗಿ ನಿಂತ. ಅವನು ಬೆವತಿದ್ದನ್ನು ನೋಡಿದ ಅನೀತಾಳಿಗೆ ಅವನ ಪರಿಸ್ಥಿತಿಯ ಅರಿವಾಗಿತ್ತು. “ಇದೆಲ್ಲ ನಿಮ್ಗೆ ಗೊತ್ತಾಗೋದು ಖುಷಿಗೆ ಬೇಕಿರ್ಲಿಲ್ಲ. ಅದಕ್ಕಾಗೇ ಇಷ್ಟೆಲ್ಲಾ… ಇಷ್ಟೆಲ್ಲಾ…” ಎನ್ನುವಾಗ ಅವಳ ಗಂಟಲು ಉಬ್ಬಿ ಬಂತು.

“ಅದ್ರೂ ಈ ಕ್ಯಾನ್ಸರ್ ಹೇಗೆ… ಈ ಕ್ಯಾನ್ಸರ್, ನನ್ನ ಖುಷಿಗೆ…” ರಾಜೇಶ್’ನ ಮಾತುಗಳು ಮುಂದುವರೆಯಲು ಸೋಲುತ್ತವೆ. ಅವನಿಗೆ ಒಂದು ಕ್ಷಣವೂ ಅಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. “ಖುಷಿ… ಖುಷಿ… ಖುಷಿ…” ಐ.ಸಿ.ಯೂ ನ ಕಡೆಗೆ ಒಂದಷ್ಟು ಜನರು ದೌಡಾಯಿಸುತ್ತಾರೆ. 

***

“ಖುಷಿ, ಖುಷಿ, ಖುಷಿ…” ಎಂದು ಜೋರಾಗಿ ಚೀರುತ್ತಿದ್ದನು ರಾಜೇಶ್. ಮೈಯೆಲ್ಲ ಒದ್ದೆಯಾಗಿ ಬೆವರ ಝಳವೆಲ್ಲ ಹರಿದು ಹೋದಂತೆನಿಸಿದ್ದರಿಂದ, ದಡಕ್ಕನೆ ಎದ್ದು ಕೂತ. ಯಾವುವೋ ಒಂದಷ್ಟು ಕೈಗಳು ಮನೆಯ ಬಾಗಿಲು ಬಡಿಯುತ್ತಿದ್ದವು.


- ಪ್ರಸಾದ್.ಡಿ.ವಿ.

ಚಿತ್ರ ಕೃಪೆ: ಗೂಗಲ್ ಅಂತರ್ಜಾಲ

Saturday, 14 September 2013

ಕದ್ದಿಂಗಳಾ ಬೆಳದಿಂಗಳು!?


ಕೌಮಾರ್ಯ ಕೈಬೀಸಿ
ಕರೆದಂತೆ,
ತನುವಿನೊಂದಿಗೆ ಮನವೂ
ಹೆಣ್ಣಾಗುತ್ತಿತ್ತು!
ಹಣ್ಣೊಳಗಿನ ಬೀಜಗಳು ಮೊಳೆತು
ಸಸಿಯಾಗಿ, ಮರವಾಗಿ
ಮತ್ತೆ ಜೊಂಪೆ ಜೊಂಪೆಯ
ಹಣ್ಣುಗಳು ತೂಗಬೇಕು,
ವಂಶ ಬೆಳಗಬೇಕು!

ವರದ ಬಲದಿಂದ
ಮದುವೆಗೆ ಮುನ್ನವೇ
ಒಂದು ಹೆತ್ತ
ಫಲಭರಿತ ಒಡಲು ನನ್ನದು,
ರಾಜ್ಯ ಕಟ್ಟಿ ಆಳಬಲ್ಲ
ರಾಜಕುಮಾರರೇ
ಹುಟ್ಟಿಬರುತ್ತಾರೆಂಬ ಆಸೆ!
ಮದುವೆಗೆ ಮೊದಲ ಬಸಿರ
ಗಂಗೆಯಲ್ಲಿ ತೊಳೆದುಬಿಟ್ಟೆ!

ಸ್ವಯಂವರದ ಸಿದ್ಧತೆ,
ದೂರ ದೂರದ ದೇಶದ
ರಾಜರು ಸಾಲುಗಟ್ಟಿಹರು,
ಅಪ್ಪ-ಅಮ್ಮನ ವರ್ಣನೆಯಿಂದ
ಕಣ್ಣೊಳಗೆ ಹೊಳೆದವನು
ಅವನೊಬ್ಬನು ಮಾತ್ರ!
ಪಾಂಡು ರಾಜಕುಮಾರ!
ಮೈಬಣ್ಣ ಸ್ವಲ್ಪ ಒಣಗಿದಂತೆ ಕಂಡರೂ
ಬಲಶಾಲಿ ಮೈಕಟ್ಟು!
ಮರು ಕ್ಷಣವೇ ನಾನು
ಕುರುವಂಶದ ಸ್ವತ್ತು!

ಕೌಮಾರ್ಯದಿ ಕಂಡ ಕನಸುಗಳು
ತಿಂಗಳಿಗೂ ಉಳಿಯದೆ
ಗಾಳಿ ಗೋಪುರ!
ರಾಜ್ಯ ಕಟ್ಟುವುದರಲ್ಲಿ
ಪಾಂಡುವಿಗಿದ್ದ ಆಸಕ್ತಿ,
ವಂಶ ಬೆಳೆಸುವುದರಲ್ಲಿ ಕಾಣುವುದಿಲ್ಲ!
ಅಷ್ಟರಲ್ಲಿ ನನ್ನೊಡಲನ್ನು ಶಂಕಿಸಿದ
ಭೀಷ್ಮ, ಮಾದ್ರಿಯನ್ನು
ನನ್ನ ಸವತಿಯಾಗಿ ತಂದ!
ಉಹೂಂ... ವಂಶ ಚಿಗುರಲಿಲ್ಲ!

ಸರಿ, ಹೇಗಾದರೂ ದೇಶ ಬೆಳೆದಂತೆ
ವಂಶ ಬೆಳೆಯಬೇಕು,
ಯಮಧರ್ಮ, ವಾಯು, ಇಂದ್ರರ
ಜಪಿಸಿ ಅನುಗ್ರಹದಿ
ಮಕ್ಕಳ ಪಡೆದರೂ
ಮನದಲ್ಲಿದ್ದುದು ಪಾಂಡುವೊಬ್ಬನೇ!
ಸಾದ್ವಿ ಈ ಕುಂತಿ, ಕುಲಟೆಯಲ್ಲ!
ಅಶ್ವಿನಿ-ದೇವತೆಯರ ಅನುಗ್ರಹದಿಂದ
ಮಾದ್ರಿಯೂ ಎರಡು ಹಡೆದಳು!

ಐವರೂ ಪಾಂಡು ಕುಮಾರರು,
ಒಬ್ಬರಿಗಿಂತೊಬ್ಬ ವೀರ ಯೋಧರು!
ಅವನೇನೆಂದನಂತೆ,
ಆ ಗಾಂಧಾರಿಯ ಮಗ ದುರ್ಯೋದನ...
ಆ ಕುಂತಿಯ ಮಕ್ಕಳನ್ನು
ಪಾಂಡುಕುಮಾರರು ಎನ್ನಲು
ಅವರೇನು
ಪಾಂಡು ಮಹರಾಜನಿಗೆ ಹುಟ್ಟಿದವರೇ?
ಎಂದನಂತಲ್ಲ, ಅವನ
ನಾಲಿಗೆ ಸೀಳಬೇಕು!
ಹಸ್ತಿನಾವತಿಯಲ್ಲಿ ಪಾಂಡವರಿಗೆ
ಪಟ್ಟ ಕಟ್ಟಬೇಕು!
ಈ ಬೆಳದಿಂಗಳೇಕೆ ಮೈ ಬೆವರಿಸುತ್ತಿದೆ,
ಕಣ್ಣು ಕತ್ತಲೆ ಕಟ್ಟುತ್ತಿದೆ!

- ಪ್ರಸಾದ್.ಡಿ.ವಿ.

ಚಿತ್ರ ಕೃಪೆ: ಗೂಗಲ್ ಅಂತರ್ಜಾಲ